ಗೃಹ ಇಲಾಖೆ ನಿಷ್ಕ್ರಿಯವಾಗುವಂತೆ ಕಾಣದ ಪ್ರಭಾವಿ ‘ಕೈ’ಗಳು ಕೆಲಸ ಮಾಡುತ್ತಿವೆ

0
46

ಬೆಂಗಳೂರು: ನಾಡಿನ ಕರಾವಳಿ ಪ್ರದೇಶದಲ್ಲಿ ಹಿಂದೂಗಳಿಗೆ ಆತಂಕ, ದುಗುಡ ತಪ್ಪುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮಂಗಳೂರಿನ ನಮ್ಮ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕಗ್ಗೊಲೆಯ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ದಿಗ್ಭ್ರಮೆಗೊಳಿಸಿದೆ, ರಾಜ್ಯದ ಜನರು ಮತೀಯ ಶಕ್ತಿಗಳ ಅಟ್ಟಹಾಸದಿಂದ ಆತಂಕದಲ್ಲಿದ್ದಾರೆ. ಇದರ ನಡುವೆಯೇ ಮತ್ತೊಬ್ಬ ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ನೈತಿಕ ಜವಾಬ್ದಾರಿಯನ್ನು ಮರೆತು ವರ್ತಿಸುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತೆಗೆದುಕೊಳ್ಳಲು ಯಾವುದೇ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ, ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗುವಂತೆ ಕಾಣದ ಪ್ರಭಾವಿ ‘ಕೈ’ ಗಳು ಕೆಲಸ ಮಾಡುತ್ತಿರುವುದು ಸುಹಾಸ್ ಕೊಲೆ ಹಾಗೂ ನಂತರದ ಬೆದರಿಕೆಗಳ ಪ್ರಕರಣಗಳಿಂದ ಸ್ಪಷ್ಟವಾಗುತ್ತಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವದ ಕುರಿತು ಭಾವುಕವಾಗಿ ಮಾತನಾಡಿರುವುದನ್ನೇ ಆಧರಿಸಿ ನೀಡಲಾಗಿರುವ ದೂರಿಗೆ ಎಫ್ಐಆರ್ ದಾಖಲಿಸಲಾಗಿದೆ, ಈ ಮೂಲಕ ಸರ್ಕಾರ ಯಾರ ಪರ ಇದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ, ಪೊಲೀಸರ ನಡೆ, ಸರ್ಕಾರದ ಧೋರಣೆ ಇದೇ ರೀತಿ ಮುಂದುವರೆದರೆ ಕರ್ನಾಟಕ ಬಿಜೆಪಿ ಜನಪರವಾದ ಹೋರಾಟ ಮತ್ತಷ್ಟು ತೀವ್ರಸ್ವರೂಪ ಪಡೆಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದಿದ್ದಾರೆ.

Previous articleಹುಬ್ಬಳ್ಳಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಆಗಮನ
Next articleಶಿರಸಿ ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತ ಜೀವವೈವಿಧ್ಯ ಪ್ರದೇಶ