Home ತಾಜಾ ಸುದ್ದಿ ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಬಿಜೆಪಿ- ಜೆಡಿಎಸ್ ಆಗ್ರಹ

ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಬಿಜೆಪಿ- ಜೆಡಿಎಸ್ ಆಗ್ರಹ

0
ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಬಿಜೆಪಿ- ಜೆಡಿಎಸ್ ಆಗ್ರಹ

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿರುವ ಕಾಂಗ್ರೆಸ್‌ ಸರ್ಕಾರದ ಅಸಂವಿಧಾನಿಕ ನಡೆಯನ್ನು ಖಂಡಿಸಿ ಮತ್ತು ಕಾನೂನುಬಾಹಿರವಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ದುರಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ನಿಯೋಗವು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.

ದೂರು ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ವೈ. ವಿಜಯೇಂದ್ರ ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದರು.