Home News ನಾವು ಯುದ್ಧದ ಪರ ಇಲ್ಲ: ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು

ನಾವು ಯುದ್ಧದ ಪರ ಇಲ್ಲ: ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು

ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ನರೇಂದ್ರ ಮೋದಿ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

Exit mobile version