ಬೆಳಗಾವಿ: ೨ಎ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮಾಜದವರು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬೆಳಗಾವಿ ಚಲೋ ಹೋರಾಟಕ್ಕೆ ಜಿಲ್ಲಾಡಳಿತ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ.
೨ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಸರ್ಕಾರ ಡಿ. ೯, ೧೦ ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. ಹೋರಾಟಕ್ಕೆ ಬರುವ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪಂಚಮಸಾಲಿ ಸಮಾಜದವರು ಡಿ.೧೦ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ಆದರೆ ಇದೀಗ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಬಿಎನ್ಎಸ್ ಕಾಯ್ದೆಯ ಕಲಂ ೧೬೩ರ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.