ಪ್ರಧಾನಿ ಕಾರ್ಯಾಲಯದ ಕಾರ್ಯದರ್ಶಿ ಸೋಗಿನಲ್ಲಿ ಕೃಷ್ಣ ಮಠಕ್ಕೆ ವಂಚನೆ

0
100

ಉಡುಪಿ: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನ ಪಡೆದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ. 9ರಂದು ಉದಯ್ ಎಂಬಾತ, ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿ ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು, ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದರು.
ಅದರಂತೆ ಅ. 9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ. ಉದಯ್ ಹಾಗೂ ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಲಾಯಿತು. ಅವರ ಚಲನವಲನದಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡಿಲ್ಲ. ಪ್ರಧಾನಮಂತ್ರಿಗಳ ವೆಬ್‌ಸೈಟ್ ಪರಿಶೀಲಿಸಿದಾಗ ಅವರ ಬಗ್ಗೆ ಸಮರ್ಪಕ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಹೇಳಿಕೊಂಡು, ಮಠಕ್ಕೆ ಆಗಮಿಸಿ ನಂಬಿಸಿ, ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್ ನಂದನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.