ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು.
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್(96) ಇಂದು ನಿಧನರಾಗಿದ್ದಾರೆ
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬಿಂಡಿಗೇನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬೆಂಗಳೂರು ಜಿಲ್ಲೆಯ ಎಸ್.ಪಿ ಹಾಗೂ ಬೆಂಗಳೂರು ಮಹಾನಗರದ ಡಿ.ಸಿ.ಪಿ ಯಾಗಿ (8 ವರ್ಷಗಳು) ಮತ್ತು ಪೊಲೀಸ್ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿ ಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದರು. ಇವರ ಕಾರ್ಯದಕ್ಷತೆಯನ್ನು ಮೆಚ್ಚಿ ಕರ್ನಾಟಕ ಸರ್ಕಾರವು ಕೆ.ಎ.ಟಿ ಯ ಸದಸ್ಯರಾಗಿ ಓರ್ವ ಐಪಿಎಸ್ ಅಧಿಕಾರಿಯನ್ನು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ನೇಮಕ ಮಾಡಿತ್ತು. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್ನ ವಿದ್ಯುತ್ ಚಿತಾಗಾರದಲ್ಲಿ ಶನಿವಾರ ಸಂಜೆ ನಡೆಯಲಿದೆ.