ಧಾರವಾಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಬಿಗ್ ರಿಲೀಫ್ ದೊರೆತಿದ್ದರೆ ಇತ್ತ ಸ್ನೇಹಮಯಿ ಕೃಷ್ಣ ಪರ ವಕೀಲರು ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನ್ಯಾಯಪೀಠ ತೀರ್ಪು ಪ್ರಕಟಿಸಿದ ಬೆನ್ನಲ್ಲಿಯೇ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ತಂಡದ ನ್ಯಾಯವಾದಿ ಲಕ್ಷ್ಮಣ ಕುಲಕರ್ಣಿ ಅವರು, ನಮಗೆ ಪ್ರಕರಣವನ್ನು ಸಿಬಿಐಗೆ ವಹಿಸುವ ಭರವಸೆ ಇತ್ತು. ಆದರೆ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಬೇಕು. ಸದ್ಯ ಯಾವ ಆಧಾರದ ಮೇಲೆ ಅರ್ಜಿ ವಜಾಗೊಳಿಸಲಾಗಿದೆ ಎಂದು ತಿಳಿದುಕೊಳ್ಳಲು ಸರ್ಟಿಫೈಡ್ ಪ್ರತಿಯನ್ನು ಪಡೆದು ಅದರ ಸಂಪೂರ್ಣ ವಿವರ ಓದಿಕೊಂಡು ನಂತರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದರು.