ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೇ ಡಿಸೆಂಬರ್ 23, 24, 25ರಂದು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿರುವುದಾಗಿ ತಿಳಿಸಿದರು.
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದರು.