Home ತಾಜಾ ಸುದ್ದಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

0

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತ್ತಿದ್ದ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳನ್ನು ಬಿಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (೩೫) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜಾ ಅವರು, ಇತರ ಕೆಲವು ಜನರೊಂದಿಗೆ, ಮೇ ೧೮ ರಂದು ರಾತ್ರಿ ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version