ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಲು ಸರತೀ ಸಾಲಿನಲ್ಲಿ ನಿಂತಿದ್ದಾರೆ
ಬೆಂಗಳೂರು: ಮಂಡ್ಯದಲ್ಲಿ ನಡೆದಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯಮೇಲಿನ ಸಾಮೂಹಿಕ ಅತ್ಯಾಚಾರ ಘಟನೆ ಅತ್ಯಂತ ಹೇಯ ಹಾಗೂ ಪೈಶಾಚಿಕ ಮನಸ್ಥಿತಿಯ ವಿಕೃತರ ಅಟ್ಟಹಾಸದ ಪರಮಾವಧಿಯಾಗಿದೆ. ಈ ಘಟನೆಯು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯಗೊಂಡಿದ್ದು, ಇದರ ಲಾಭ ಪಡೆಯುತ್ತಿರುವ ಸಮಾಜಘಾತುಕ ದುಷ್ಕರ್ಮಿಗಳು ಅಪ್ರಾಪ್ತರ ಮೇಲೆ ಅತ್ಯಾಚಾರ, ಮಹಿಳೆಯರ ಮೇಲೆ ದೌರ್ಜನ್ಯ, ಹಾಗೂ ಹಾಡು ಹಗಲಲ್ಲೇ ದರೋಡೆಗಳು ಎಗ್ಗಿಲ್ಲದೇ ಮುಂದುವೆರೆಸಿವೆ, ಸದ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾದಿಯಾಗಿ ಜವಾಬ್ದಾರಿ ಹೊತ್ತ ಸಚಿವರೆಲ್ಲರೂ ಪವರ್ ಶೇರಿಂಗ್ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಪಾಲಿಟಿಕ್ಸ್ ರಾಜಕಾರಣದಲ್ಲಿ ಮುಳುಗಿದ್ದಾರೆ.
ಆಡಳಿತ ವ್ಯವಸ್ಥೆ ಅಸ್ತಿರಗೊಳ್ಳುತ್ತಿರುವುದರ ಲಾಭ ಪಡೆಯುತ್ತಿರುವ ಅಧಿಕಾರಿಗಳಿಗೆ ಮೂಗುದಾರ ಹಾಕುವವರು ಇಲ್ಲವಾಗಿದೆ, ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಲು ಸರತೀ ಸಾಲಿನಲ್ಲಿ ನಿಂತಿದ್ದಾರೆ. ಕಾನೂನು ಸುವ್ಯವಸ್ಥೆಯ ರಕ್ಷಣೆ ದೊರೆಯದ ಅಮಾಯಕ ಜನ ಕಳ್ಳತನ, ದರೋಡೆ, ದೌರ್ಜನ್ಯ ಹಾಗೂ ಅತ್ಯಾಚಾರಗಳು ಎದುರಾಗುವ ಪರಿಸ್ಥಿತಿಯ ಆತಂಕದಲ್ಲಿ ಬದುಕುತ್ತಿದ್ದಾರೆ.
ಕ್ರೌರ್ಯದ ಪರಮಾವಧಿ ಮೆರದಿರುವ ಅಪ್ರಾಪ್ತ ಬಾಲಕಿಯನ್ನು ಕೇಂದ್ರೀಕರಿಸಿಕೊಂಡಿರುವುದರ ಸಾಕ್ಷಿಯಾಗಿ ಮಂಡ್ಯದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯು ಸೇರ್ಪಡೆಗೊಂಡಿದೆ. ಈ ಕೂಡಲೇ ಬಾಲಕಿಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸರ್ಕಾರ ಕಠಿಣ ಕ್ರಮ ಜರುಗಿಸದಿದ್ದರೆ ಈ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಮಾಜ ಪೀಡಕ ದುಷ್ಟರಿಗೆ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ತೀರ್ಮಾನಕ್ಕೆ ರಾಜ್ಯದ ಜನತೆ ಬರಬೇಕಾದ ಪರಿಸ್ಥಿತಿ ಉದ್ಭವಿಸಿದೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಕರ್ನಾಟಕ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿ ಜನರ ನೆರವಿಗೆ ಧಾವಿಸಲು ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದಿದ್ದಾರೆ.