ಕಲಬುರಗಿ: ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ರೈತ ಮುಖಂಡರು ಭಾನುವಾರ ಅನ್ನಪೂರ್ಣ ಕ್ರಾಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲೆಯಲ್ಲಿ 2 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ, ಹತ್ತಾರು ರೈತ ಮುಖಂಡರು ಜಾಮಾಯಿಸಿದ್ದರು.
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪರಿಹಾರಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಸೇಡಂ ರಸ್ತೆಯ ವಿಮಾನ ನಿಲ್ದಾಣದಿಂದ ಬಂದ ಸಿದ್ದರಾಮಯ್ಯ ಅವರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.