ಹುಬ್ಬಳ್ಳಿ: ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಲ್ಲೇ ಇಲ್ಲ. ಹೀಗಾಗಿ ಆ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಕೇಳಿ ಬರುತ್ತಿದೆ. ಈ ಸಂಬಂಧ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮಾಡಲು ಸಾಕಷ್ಟು ಕೆಲಸಗಳಿರುವಾಗಿ ಇಲ್ಲಸಲ್ಲದ ವಿಷಯಗಳ ಚರ್ಚೆ ಮಾಡುವುದು ಸೂಕ್ತವಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಎರಡು ಜೋಡೆತ್ತುಗಳು ಅವರಿಬ್ಬರ ನಾಯಕತ್ವವೂ ನಮಗೆ ಅವಶ್ಯ ಎಂದರು.
ತುರ್ತಾಗಿ ನಿಗಮ ಮಂಡಳಿಗಳಿಗೆ ನೇಮಕ ಆಗಬೇಕಿದೆ. ಕಾರ್ಯಕರ್ತರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದರೆ ಕಾರ್ಯಕರ್ತರು ಮತ್ತಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಾರೆ ಎಂದರು.
ಬಿಜೆಪಿ ನಾಯಕರು ನಮ್ಮ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇಡಿ ವಿಚಾರವಾಗಿ ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.