ಬೆಂಗಳೂರು: ಕಾಂಗ್ರೆಸ್ ಶಾಸಕರೊಬ್ಬರಿಗೆ ಇಡಿ ಶಾಕ್ ನೀಡಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಇಡಿ ದಾಳಿಯಾಗಿದೆ. ಕರ್ನಾಟಕದ ವಿಧಾನ ಮಂಡಲದ ಮುಂಗಾರು ಅಧಿವೇಶನದ ಸಂದರ್ಭದಲ್ಲಿಯೇ ಈ ದಾಳಿಯಾಗಿದೆ.
ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬೆಂಗಳೂರಿನ ಸದಾಶಿವ ನಗರದ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಖಾಸಗಿ ಕಾರಿನಲ್ಲಿ ಬಂದ ಇಡಿ ಅಧಿಕಾರಿಗಳ ತಂಡ ಶಾಸಕರ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಕೈಗೊಂಡಿದೆ. ಶಾಸಕರ ನಿವಾಸಕ್ಕೆ ಹೊರಗಿನಿಂದ ಎಲ್ಲರ ಪ್ರವೇಶ ನಿಷೇಧಿಸಲಾಗಿದೆ.
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಆದ್ದರಿಂದ ಶಾಸಕರು ಸದಾಶಿವ ನಗರದ ನಿವಾಸದಲ್ಲಿಯೇ ಇರುವ ಸಾಧ್ಯತೆ ಇದೆ. ಬೆಂಗಳೂರಿನ ನಿವಾಸದ ಮೇಲೆ ಮಾತ್ರ ದಾಳಿ ನಡೆದಿದೆಯೇ?, ಶಾಸಕರಿಗೆ ಸೇರಿದ ಇತರ ಪ್ರದೇಶಗಳಲ್ಲಿಯೂ ದಾಳಿಯಾಗಿದೆಯೇ? ಎಂಬ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಲ್ಲಿ 77,445 ಮತಗಳನ್ನು ಪಡೆದು ಕಾಂಗ್ರೆಸ್ನ ಸತೀಶ್ ಸೈಲ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಎದುರಾಳಿಯಾಗಿದ್ದ ಬಿಜೆಪಿಯ ರೂಪಾಲಿ ಸಂತೋಷ್ ನಾಯಕ್ 75,307 ಮತಗಳನ್ನು ಪಡೆದಿದ್ದಾರೆ.
ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ ಆರೋಪ ಮೇಲೆ ಶಾಸಕರ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ ಎಂದು ಅಂದಾಜಿಸಲಾಗಿದೆ. ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದು, ದಾಳಿ ಕುರಿತು ಯಾವುದೇ ಮಾಹಿತಿ ನೀಡಿಲ್ಲ.
ಜೈಲು ಶಿಕ್ಷೆಯಾಗಿತ್ತು: 2024ರಲ್ಲಿ ವಶಪಡಿಸಿಕೊಂಡ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ 6 ಪ್ರಕರಣಗಳಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ಗೆ ವಿಚಾರಣಾ ನ್ಯಾಯಾಲಯ ತಲಾ 7 ವರ್ಷದ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಈ ಆದೇಶವನ್ನು ಪ್ರಶ್ನೆ ಮಾಡಿ ಶಾಸಕರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದ್ದರಿಂದ ಅವರ ದೋಷಾರೋಪಣೆಯನ್ನು ಕರ್ನಾಟಕ ಹೈಕೋರ್ಟ್ ಅಮಾನತುಗೊಳಿಸಿತ್ತು. ಅಧೀನ ನ್ಯಾಯಾಲಯದ ತೀರ್ಪಿನ ಬಳಿಕ ಕೆಲವು ದಿನಗಳ ಕಾಲ ಶಾಸಕರು ಜೈಲು ಸೇರಿದ್ದರು.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆ ಬಳಿಕ ಸಿಬಿಐ ಕೈ ಸೇರಿತ್ತು.
2014ರಲ್ಲಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. 2024ರಲ್ಲಿ ತೀರ್ಪು ಪ್ರಕಟವಾಗಿತ್ತು. ಉದ್ಯಮಿ, ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಸೈಲ್ ಪ್ರಕರಣದಲ್ಲಿ ಆರೋಪಿಯಾಗಿದ್ದರು.
ಈ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಮೊದಲನೇ ಆರೋಪಿ ಮಹೇಶ್ ಜೆ. ಬಿಳಿಯೆ ಸೇರಿದಂತೆ ಎಲ್ಲಾ ಆರೋಪಿಗಳು ದೋಷಿಗಳೆಂದು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಆದೇಶಿಸಿತ್ತು. ಬಳಿಕ ಶಾಸಕರು ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು.