Government Employee: ಸರ್ಕಾರದ ಮುಂದೆ ರಾಜ್ಯ ಸರ್ಕಾರಿ ನೌಕರರ ಹೊಸ ಬೇಡಿಕೆ

1
372

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕರ್ನಾಟಕ ಸರ್ಕಾರದ ಮುಂದೆ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ. ಈ ಬೇಡಿಕೆ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ/ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳುವ ಕುರಿತಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಪಡಾಕ್ಷರಿ ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೇಡಿಕೆ ಏನು?: ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್/ಹೆಚ್ಚುವರಿ ಶಿಕ್ಷಕರ ವರ್ಗಾವಣೆಗಾಗಿ ಉಲ್ಲೇಖದಂತೆ ಅಧಿಸೂಚನೆ ಹೊರಡಿಸಲಾಗಿದ್ದು, ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳಲು ಮನವಿ ಸಲ್ಲಿಕೆ ಮಾಡಲಾಗಿದೆ.

  • ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಅನುಷ್ಠಾನವಾಗದೇ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹೆಚ್ಚುವರಿಯಾಗುತ್ತಿದ್ದಾರೆ.
  • ಆದ್ದರಿಂದ, ಪ್ರಾಥಮಿಕ ಶಾಲಾ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯ ಮ್ಯಾಪಿಂಗ್ ಸಂದರ್ಭದಲ್ಲಿ ಆಯಾ ತಾಲ್ಲೂಕಿನ ಶಿಕ್ಷಕರನ್ನು ಆದಷ್ಟು ಆಯಾ ತಾಲ್ಲೂಕಿನ ವ್ಯಾಪ್ತಿಯಲ್ಲಿಯೇ ಸ್ಥಳನಿಯುಕ್ತಿಗೊಳಿಸಲು ಅನುಕೂಲವಾಗುವಂತೆ ಹುದ್ದೆಗಳನ್ನು ತೋರಿಸುವುದು.
  • ರಾಜ್ಯದಲ್ಲಿ ಸಾಕಷ್ಟು ಜಿ.ಪಿ.ಟಿ. ಹುದ್ದೆಗಳು ಖಾಲಿ ಇದ್ದು, ಇನ್ನೂ ಭರ್ತಿಯಾಗಿರುವುದಿಲ್ಲ. ಸದರಿ ಹುದ್ದೆಗಳನ್ನು ಭರ್ತಿ ಮಾಡದೇ ಇದ್ದು ಹಾಗೂ ಹಾಲಿ ಇರುವ ಪಿ.ಎಸ್.ಟಿ. ಶಿಕ್ಷಕರ ಹುದ್ದೆಗಳನ್ನು ಜಿ.ಪಿ.ಟಿ. ಹುದ್ದೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಕ್ರಮವನ್ನು ಕೈಬಿಟ್ಟು ಪಿ.ಎಸ್.ಟಿ. ಹುದ್ದೆಗಳನ್ನು ಯಥಾಸ್ಥಿತಿಯಲ್ಲಿಯೇ ಉಳಿಸುವುದು.
  • 1 ರಿಂದ 5ನೇ ತರಗತಿಯವರೆಗೆ ಹಿಂದಿ ಭಾಷಾ ವಿಷಯ ಇಲ್ಲದೇ ಇರುವುದರಿಂದ ಹಿಂದಿ ಭಾಷಾ ಶಿಕ್ಷಕರು ಸಾಮಾನ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರನ್ನೂ ಸಹ ಸಾಮಾನ್ಯ ಶಿಕ್ಷಕರೆಂದು ಪರಿಗಣಿಸುವುದು.
  • ಶಾಲೆಯಲ್ಲಿ ಹೆಚ್ಚುವರಿ ಎಂದು ಗುರುತಿಸಿದ ಶಿಕ್ಷಕರ ಬದಲಾಗಿ ಬೇರೆ ಯಾರಾದರೂ ಸ್ವ-ಇಚ್ಛೆಯಿಂದ ಹೆಚ್ಚುವರಿಯಾಗಿ ಸ್ಥಳಾಂತರ ಹೊಂದಲು ಇಚ್ಚಿಸಿದಲ್ಲಿ ಅಂತಹ ಶಿಕ್ಷಕರಿಗೆ ಮುಕ್ತ ಅವಕಾಶ ಕಲ್ಪಿಸುವುದು.
  • ಶಿಕ್ಷಕರುಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿದ್ದಲ್ಲಿ ಸರ್ಕಾರಿ ಆದೇಶದಂತೆ ಹೆಚ್ಚುವರಿ ವರ್ಗಾವಣೆಯಿಂದ ವಿನಾಯಿತಿ ನೀಡುವುದು.

ಕರ್ನಾಟಕ ಸರ್ಕಾರ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ವೇಳೆಗೆ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಡೆಸುತ್ತದೆ. ಈ ವರ್ಷ ಮೇ 29ರಿಂದಲೇ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಿದ್ದವು. ಒಂದು ಸ್ಥಳದಲ್ಲಿ ಕನಿಷ್ಠ 3 ವರ್ಷ ಪೂರೈಸಿದವರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಲಾಗಿತ್ತು.

ಮೊದಲ ಹಂತದಲ್ಲಿ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ನಡೆದಿದ್ದು, ನಂತರ ಶಿಕ್ಷಕರು, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿತ್ತು. ಈ ವರ್ಗಾವಣೆ ಪ್ರಕಿಯೆ ಹೇಗೆ ನಡೆಯಬೇಕು? ಎಂದು ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿತ್ತು.

ಈಗ ರಾಜ್ಯ ಸರ್ಕಾರಿ ನೌಕರರ ಸಂಘ ಪುನಃ ಶಿಕ್ಷಕರ ವರ್ಗಾವಣೆ ಸಂದರ್ಭದಲ್ಲಿ ಗಮನಿಸಬೇಕಾದ ಅಂಶಗಳ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಕೆ ಮಾಡಿದೆ.

Previous articleಸಂಯುಕ್ತ ಕರ್ನಾಟಕದ ವರದಿ ಉಲ್ಲೇಖಿಸಿ ಯತೀಂದ್ರಗೆ ಆರ್.ಅಶೋಕ ಟಾಂಗ್
Next articleಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಉತ್ತರ ಕರ್ನಾಟಕಕ್ಕೆ ಗುಡ್‌ನ್ಯೂಸ್

1 COMMENT

LEAVE A REPLY

Please enter your comment!
Please enter your name here