Home Advertisement
Home ಸುದ್ದಿ ದೇಶ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲುತೂರಾಟ

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಲ್ಲುತೂರಾಟ

0
99

ಹರ್ದೋಯಿ (ಉತ್ತರ ಪ್ರದೇಶ): ಆರ್‌ಎಸ್‌ಎಸ್‌ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲುತೂರಾಟ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಸುಮಾರು 3.20ರಿಂದ 3.30ರ ವೇಳೆಗೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಕೌಡಾ ಸಮೀಪ ನಡೆದಿದೆ.

ಲಖ್ನೌನಿಂದ ದೆಹಲಿಯತ್ತ ತೆರಳುತ್ತಿದ್ದ ರೈಲನ್ನು ಗುರಿಯಾಗಿರಿಸಿಕೊಂಡು ಕಲ್ಲು ಎಸೆದ ಪರಿಣಾಮ ಒಂದು ಬೋಗಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ – 8 ಮಂದಿ ಬಂಧನ

ಪ್ರಾಥಮಿಕ ತನಿಖೆ – ಮಕ್ಕಳ ಕೈಚಳಕವೇ?: ರೈಲ್ವೆ ಪೊಲೀಸ್ ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ರೈಲು ಹಳಿಯ ಪಕ್ಕದಲ್ಲಿ 8 ರಿಂದ 13 ವರ್ಷದ ಮಕ್ಕಳು ಆಟವಾಡುತ್ತಿದ್ದರು. ಅವರೇ ಕಲ್ಲು ತೂರಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಆದಾಗ್ಯೂ, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಭಾಗವತ್ ಸುರಕ್ಷಿತ – ಮೀರತ್‌ಗೆ ಆಗಮನ: ಘಟನೆ ನಡೆದಾಗ ಮೋಹನ್ ಭಾಗವತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಪ್ರಯಾಣದಲ್ಲಿದ್ದರು ಎಂದು ತಿಳಿದುಬಂದಿದೆ. ಘಟನೆಯ ನಡುವೆಯೂ ಅವರು ಸುರಕ್ಷಿತರಾಗಿದ್ದು, ರಾತ್ರಿ ಸುಮಾರು 9 ಗಂಟೆ ವೇಳೆಗೆ ಮೀರತ್ ರೈಲು ನಿಲ್ದಾಣಕ್ಕೆ ತಲುಪಿದರು. ಅಲ್ಲಿ ಬಿಗಿ ಭದ್ರತೆಯೊಂದಿಗೆ ಅವರನ್ನು ಸ್ವಾಗತಿಸಲಾಯಿತು.

ಇದನ್ನೂ ಓದಿ: ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ

ಮೀರತ್‌ನಲ್ಲಿ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Previous articleKMF ಉತ್ಪನ್ನಗಳ ಬಗ್ಗೆ ಕ್ಯಾನ್ಸರ್ ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಿಮಿನಲ್ ಕೇಸ್
Next articleಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯ