ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಭಾರತವು ‘ವಿಶ್ವಗುರು’ ಆಗದಿದ್ದರೂ, ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವ ಕಲೆ ಕಲಿತಂತಾಗಿದೆ” ಎಂದು ಮುಫ್ತಿ ವ್ಯಂಗ್ಯವಾಡಿದ್ದಾರೆ. ಪಶ್ಚಿಮ ಬಂಗಾಳದ ಘಟನೆಗಳು ಈ ಆತಂಕಕಾರಿ ಸ್ಥಿತಿಗೆ ಇತ್ತೀಚಿನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
ಭಾರತದ ಚುನಾವಣಾ ಆಯೋಗವು ಒಂದು ಕಾಲದಲ್ಲಿ ಸ್ವತಂತ್ರ ಹಾಗೂ ನ್ಯಾಯಸಮ್ಮತ ಚುನಾವಣೆಗೆ ವಿಶಕ್ಕೆ ಮಾದರಿಯಾಗಿತ್ತು. ವಿಶೇಷವಾಗಿ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ಕಾಲದಲ್ಲಿ ಆಯೋಗವು ಭಯವಿಲ್ಲದ ಪ್ರಜಾಪ್ರಭುತ್ವದ ರಕ್ಷಕನಾಗಿ, ಪಾರದರ್ಶಕವಾಗಿ ಕಾರ್ಯನಿರ್ವಹಿಸಿದ್ದರು ಎಂದಿದ್ದಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಅದೇ ಸಂಸ್ಥೆಯ ಮೇಲೆ ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ ಎಂದು ಮುಫ್ತಿ ಟೀಕಿಸಿದ್ದಾರೆ. ಕೇಂದ್ರ ಸಂಸ್ಥೆಗಳ ಸಹಾಯದಿಂದ ಚುನಾವಣಾ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ.





















