ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದು, ಇದು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ದೇಶದಾದ್ಯಂತ ಹೋರಾಟ ನಡೆಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ತಮ್ಮ ಭವಿಷ್ಯವನ್ನು ರಕ್ಷಿಸಲು ಬೀದಿಗಿಳಿದು ಹೋರಾಡಿದ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ನಮಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.
ಇದೇ ವೇಳೆ ಇನ್ನೂ ಎರಡು ಪ್ರಮುಖ ಬೇಡಿಕೆಗಳು ಈಡೇರಬೇಕಿದ್ದು, ಪ್ರಧಾನಿ ವಿದ್ಯಾರ್ಥಿಗಳು ಮತ್ತು ದೇಶದ ಭವಿಷ್ಯದ ಬಗ್ಗೆ ಗೌರವ ಸೂಚಿಸಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ನಡೆದ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ರೈತರು, ಕಾರ್ಮಿಕರು, ಬಡವರು ಹಾಗೂ ಸರ್ಕಾರದಿಂದ ದಮನಕ್ಕೆ ಒಳಗಾಗಿರುವ ಪ್ರತಿಯೊಬ್ಬ ನಾಗರಿಕರೂ ಸಂವಿಧಾನಬದ್ಧವಾಗಿ ತಮ್ಮ ಹಕ್ಕುಗಳಿಗಾಗಿ ಧೈರ್ಯದಿಂದ ನಿಲ್ಲಬೇಕು ಎಂದು ಕರೆ ನೀಡಿದ ಅವರು, “ಈ ಸರ್ಕಾರವನ್ನು ಬದಲಿಸುವ ಸಮಯ ಬಂದಿದೆ” ಎಂದು ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.



















