Home Advertisement
Home ಸುದ್ದಿ ದೇಶ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ

0
57

ನವದೆಹಲಿ: ದೇಶದ ಪ್ರಮುಖ ರಾಜಕೀಯ ಚಟುವಟಿಕೆಗಳಿಗೆ ಚಾಲನೆ ನೀಡುವಂತಹ ಮಹತ್ವದ ಘಟ್ಟ ಇಂದು ಎದುರಾಗಲಿದೆ. ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಇಂದು ಪ್ರಕಟಿಸಲಿದೆ.

ಭಾನುವಾರ ಸಂಜೆ 4 ಗಂಟೆಗೆ ನವದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆಯೇ ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ತಕ್ಷಣ ಜಾರಿಗೆ ಬರಲಿದೆ. ಇದರ ಮೂಲಕ ಆಡಳಿತ ಪಕ್ಷ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದರು. ಇತ್ತೀಚೆಗೆ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಅಲ್ಲಿನ ಚುನಾವಣಾ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ. ನಂತರ ಮಾರ್ಚ್ 10ರಂದು ಅವರು ನವದೆಹಲಿಗೆ ಮರಳಿದ್ದರು. ಅದಕ್ಕೂ ಮೊದಲು ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಗೂ ಭೇಟಿ ನೀಡಿ ಚುನಾವಣಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಾಗಿತ್ತು.

ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿ ಮೇ 7ರಂದು ಕೊನೆಗೊಳ್ಳಲಿದೆ. ತಮಿಳುನಾಡಿನ ವಿಧಾನಸಭೆಯ ಅವಧಿ ಮೇ 10ರಂದು ಮುಕ್ತಾಯಗೊಳ್ಳಲಿದ್ದು, ಅಸ್ಸಾಂ ವಿಧಾನಸಭೆಯ ಅವಧಿ ಮೇ 20ರಂದು ಅಂತ್ಯಗೊಳ್ಳಲಿದೆ. ಕೇರಳ ವಿಧಾನಸಭೆಯ ಅವಧಿ ಮೇ 23ರಂದು ಮುಕ್ತಾಯಗೊಳ್ಳಲಿದೆ.

ಈ ಬಾರಿ ನಡೆಯುವ ವಿಧಾನಸಭಾ ಚುನಾವಣೆಗಳಲ್ಲಿ ತಂತ್ರಜ್ಞಾನ ಬಳಕೆಯನ್ನು ಮತ್ತಷ್ಟು ವಿಸ್ತರಿಸಲು ಚುನಾವಣಾ ಆಯೋಗ ವಿಶೇಷ ಕ್ರಮ ಕೈಗೊಂಡಿದೆ. ಮೂಲಗಳ ಪ್ರಕಾರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಹಾಗೂ ಪುದುಚೇರಿಯಲ್ಲಿ ನಡೆಯುವ ಮತದಾನದಲ್ಲಿ ಮೊದಲ ಬಾರಿಗೆ ಎಲ್ಲ ಮತಗಟ್ಟೆಗಳಲ್ಲಿ ಶೇಕಡಾ 100ರಷ್ಟು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದರ ಮೂಲಕ ಮತದಾನ ಪ್ರಕ್ರಿಯೆಯನ್ನು ನೈಜ ಸಮಯದಲ್ಲಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದೆ.

ಇದೇ ರೀತಿಯ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಕಳೆದ ವರ್ಷದ ಕೊನೆಯಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿಯೂ ಯಶಸ್ವಿಯಾಗಿ ಜಾರಿಗೆ ತರಲಾಗಿತ್ತು. ಅಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಶೇಕಡಾ 100ರಷ್ಟು ವೆಬ್‌ಕಾಸ್ಟಿಂಗ್ ಮೂಲಕ ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಾಗಿತ್ತು.

ವಿಧಾನಸಭಾ ಚುನಾವಣೆಗಳು ದೇಶದ ರಾಜಕೀಯ ಭವಿಷ್ಯಕ್ಕೆ ಮಹತ್ವದ್ದಾಗಿದ್ದು, ಚುನಾವಣಾ ಆಯೋಗವು ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಇಂದು ಸಂಜೆ ನಡೆಯುವ ಪತ್ರಿಕಾಗೋಷ್ಠಿ ಬಳಿಕ ಚುನಾವಣಾ ಚಟುವಟಿಕೆಗಳು ಅಧಿಕೃತವಾಗಿ ಆರಂಭವಾಗಲಿವೆ.