ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಎಲ್ಲಾ 6 ಚರಣಗಳು ಕಡ್ಡಾಯ
ನವದೆಹಲಿ: ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಭಕ್ತಿ ಮತ್ತು ರಾಷ್ಟ್ರಗೌರವವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಮಹತ್ವದ ಆದೇಶ ಹೊರಡಿಸಿದೆ. ಧ್ವಜಾರೋಹಣ, ರಾಷ್ಟ್ರಪತಿಗಳ ಆಗಮನ, ರಾಜ್ಯಪಾಲರ ಭಾಷಣ ಹಾಗೂ ಇತರ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಸಂಪೂರ್ಣ ಆರು ಚರಣಗಳ ಮೂರು ನಿಮಿಷ 10 ಸೆಕೆಂಡುಗಳ ಆವೃತ್ತಿಯನ್ನು ಕಡ್ಡಾಯವಾಗಿ ಹಾಡಬೇಕು ಅಥವಾ ನುಡಿಸಬೇಕು ಎಂದು ಸಚಿವಾಲಯ ನಿರ್ದೇಶನ ನೀಡಿದೆ.
ಈ ಆದೇಶದ ಪ್ರಕಾರ, ರಾಷ್ಟ್ರಗೀತೆ ‘ಜನಗಣಮನ’ಕ್ಕೆ ಮುನ್ನ ‘ವಂದೇ ಮಾತರಂ’ನ ಆರು ಚರಣಗಳನ್ನು ಹಾಡುವುದು ಕಡ್ಡಾಯವಾಗಿದ್ದು, ಗೀತೆ ನುಡಿಸುವ ಅಥವಾ ಹಾಡುವ ಸಂದರ್ಭದಲ್ಲಿ ಎಲ್ಲರೂ ಗೌರವ ಸೂಚಕವಾಗಿ ಎದ್ದು ನಿಲ್ಲಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಲ್ಲಿ, ಈ ನಿಯಮವನ್ನು ಈ ಕೆಳಗಿನ ಸಂದರ್ಭಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ:
ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ
ಸರ್ಕಾರಿ ಸಮಾರಂಭಗಳಿಗೆ ರಾಷ್ಟ್ರಪತಿಗಳ ಆಗಮನದ ವೇಳೆ
ರಾಷ್ಟ್ರಪತಿಗಳ ಭಾಷಣಕ್ಕೂ ಮೊದಲು ಮತ್ತು ನಂತರ
ರಾಷ್ಟ್ರವನ್ನು ಉದ್ದೇಶಿಸಿ ಮಾಡುವ ಭಾಷಣಗಳ ಮೊದಲು ಮತ್ತು ನಂತರ
ರಾಜ್ಯಪಾಲರ ಆಗಮನ ಮತ್ತು ಭಾಷಣಗಳ ಸಂದರ್ಭದಲ್ಲಿ
‘ವಂದೇ ಮಾತರಂ’ನ ಪೂರ್ಣ ಆವೃತ್ತಿಗೆ ಅಧಿಕೃತ ಮಾನ್ಯತೆ: ಇದುವರೆಗೆ ‘ವಂದೇ ಮಾತರಂ’ ಹಾಡಲು ಯಾವುದೇ ಅಧಿಕೃತ ಶಿಷ್ಟಾಚಾರ ಅಥವಾ ಸ್ಪಷ್ಟ ಮಾರ್ಗಸೂಚಿಗಳು ಇರಲಿಲ್ಲ. ಇದಕ್ಕೆ ವಿರುದ್ಧವಾಗಿ, ರಾಷ್ಟ್ರಗೀತೆ ‘ಜನಗಣಮನ’ಕ್ಕೆ ರಾಗ, ಸಮಯ ಮತ್ತು ಗಾಯನದ ಕುರಿತು ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದವು. ಆದರೆ ಈಗ ಮೊದಲ ಬಾರಿಗೆ ‘ವಂದೇ ಮಾತರಂ’ನ ಪೂರ್ಣ ಆವೃತ್ತಿಗೆ ಅಧಿಕೃತ ಮಾನ್ಯತೆ ನೀಡಿ ಕಡ್ಡಾಯಗೊಳಿಸಲಾಗಿದೆ.
ಈ ನಿರ್ದೇಶನವನ್ನು ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಕಳುಹಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವು ರಾಷ್ಟ್ರಭಕ್ತಿ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ಜನರಲ್ಲಿ ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.























