ರಾಹುಲ್ ಗಾಂಧಿ ದೃಢ ನಿಶ್ಚಯದಿಂದ ಭಾರತದಲ್ಲಿ ಜಾತಿ ಗಣತಿ: ಸಿದ್ದರಾಮಯ್ಯ

0
43

ಬೆಂಗಳೂರು: “ರಾಹುಲ್ ಗಾಂಧಿಯವರ ದೃಢನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ ಜಾತಿ ಗಣತಿಯನ್ನು ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸುತ್ತದೆ” ಎಂದು ಸಮಿತಿಯ ಸದಸ್ಯ, ಕರ್ನಾಟಕದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, “ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ. ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು, ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ” ಎಂದರು.

“ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. ತನ್ಮೂಲಕ ನಮ್ಮ ಮಹಾನ್ ದೇಶದಲ್ಲಿ ಸಮಸಮಾಜವನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ” ಎಂದು ತಿಳಿಸಿದರು.

ವರದಿ ಸ್ವೀಕರಿಸದಂತೆ ಎಚ್. ಡಿ. ಕುಮಾರಸ್ವಾಮಿ ಸೂಚನೆ: ಸಿದ್ದರಾಮಯ್ಯ ಮಾತನಾಡಿ, “2015ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಕೈಗೊಳ್ಳಲು ಹಿಂದುಳಿದ ವರ್ಗದ ಆಯೋಗಕ್ಕೆ ಆದೇಶ ನೀಡಲಾಗಿತ್ತು. ಕೇವಲ ಹಿಂದುಳಿದ ವರ್ಗವಲ್ಲದೇ ಎಲ್ಲಾ ಜನರನ್ನು ಸಮೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದ್ದು, ಆಯೋಗವು ಸಮೀಕ್ಷೆಯನ್ನು ನಡೆಸಿತು” ಎಂದರು.

“2018ರಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರಕ್ಕೆ ಬಂದಾಗ, ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ವರದಿಯನ್ನು ನೀಡಲು ಕಾಲಾವಕಾಶ ನೀಡುವಂತೆ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಅವರನ್ನು ಕೋರಿದರು. ಆಯೋಗದ ಕೋರಿಕೆಯನ್ನು ಕುಮಾರಸ್ವಾಮಿಯವರು ಮನ್ನಿಸಲಿಲ್ಲ. ಅಂದು ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿಯವರು ಆಯೋಗಕ್ಕೆ ಕಾಲಾವಕಾಶವನ್ನು ನೀಡಿದರೂ, ವರದಿಯನ್ನು ಸ್ವೀಕರಿಸದಂತೆ ಸಚಿವರಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದರು” ಎಂದು ದೂರಿದರು.

ಮೊದಲ ರಾಜ್ಯ ಕರ್ನಾಟಕ: “ಸಮ್ಮಿಶ್ರ ಸರ್ಕಾರದಲ್ಲಿ ನಂತರದ ಮೂರು ವರ್ಷ, ಹತ್ತು ತಿಂಗಳು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ಆಯೋಗದ ವರದಿಯನ್ನು ಸ್ವೀಕರಿಸುವುದಾಗಲಿ, ಜಾರಿ ಮಾಡುವ ಬಗ್ಗೆಯಾಗಲಿ ಮಾತನಾಡಲಿಲ್ಲ. ನಂತರದ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ ಶಿಫಾರಸ್ಸುಗಳನ್ನು ಮಾಡಿ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿದರು. ಈ ವರದಿಯನ್ನು ನಮ್ಮ ಸಚಿವ ಸಂಪುಟದಲ್ಲಿ ಮಂಡಿಸಿ ಚರ್ಚಿಸಿದಾಗ, ಸದರಿ ವರದಿಯು 10 ವರ್ಷದ ಹಿಂದಿನ ಸಮೀಕ್ಷೆಯನ್ನು ಆಧರಿಸಿರುವುದರಿಂದ ಪುನಃ ಸಮೀಕ್ಷೆ ಮಾಡುವ ನಿರ್ಣಯವನ್ನು ಸಚಿವ ಸಂಪುಟ ಕೈಗೊಂಡಿದೆ” ಎಂದರು.

“ಸಚಿವ ಸಂಪುಟದ ನಿರ್ಣಯದಂತೆ ಹಿಂದುಳಿದ ವರ್ಗದ ಆಯೋಗಕ್ಕೆ 3 ತಿಂಗಳ ಕಾಲಾವಕಾಶದಲ್ಲಿ ಮರುಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಆಯೋಗವು ನೀಡಿದ ವರದಿಯನ್ನು ಜಾರಿ ಮಾಡಲಾಗುವುದು. 1931ರ ನಂತರ ಜಾತಿ ಜನಗಣತಿಯನ್ನು ಕೈಗೊಂಡ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದಲೇ ಅದನ್ನು ಕರ್ನಾಟಕ ಮಾದರಿ ಎಂದು ಕರೆಯಲಾಗುತ್ತದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

“ಕಾಂಗ್ರೆಸ್ ಪಕ್ಷ ಎಂದೆಂದಿಗೂ ಸಂವಿಧಾನಕ್ಕೆ ಬದ್ಧವಾಗಿರುತ್ತದೆ. ಅಹಿಂದ ತತ್ವವು ಎಲ್ಲರಿಗೂ ಸಮಪಾಲು, ಸಮಬಾಳು ಎಂಬುದರ ಆಧಾರವಾಗಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮಾನತೆ ಇಲ್ಲವಾಗಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಬೇಕಾಗಿದೆ. ನ್ಯಾಯಯೋಧ ರಾಹುಲ್ ಗಾಂಧಿಯವರು ಪ್ರತಿಪಾದಿಸುತ್ತಿರುವ ಜಾತಿಗಣತಿ ಕೇವಲ ಜಾತಿಗಳ ಗಣತಿಯಾಗಿರದೇ, ಅದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ನಡೆಸುವ ಸಮೀಕ್ಷೆಯಾಗಿದೆ. ಹಿಂದುಳಿದ ಸಮುದಾಯಗಳಿಗೆ ಸಮಾನ ಅವಕಾಶ ಒದಗಿಸುವ ದಿಟ್ಟ ನಿರ್ಧಾರವನ್ನು ರಾಹುಲ್ ಗಾಂಧಿಯವರು ಕೈಗೊಂಡಿದ್ದಾರೆ” ಎಂದರು.

Previous articleಕೇರಳದ U ಆಕಾರದ ತರಗತಿ ಚಿತ್ರ ವೈರಲ್: ಕರ್ನಾಟಕದಲ್ಲಿರುವ ಈ ಮಾದರಿ ಶಾಲೆ ಬಗ್ಗೆ ಗೊತ್ತೇ?
Next articleಜುಲೈ 19ರ ಮೈಸೂರಿನ ಕಾಂಗ್ರೆಸ್ ಸಮಾವೇಶ ಸಿದ್ದರಾಮಯ್ಯ ಶಕ್ತಿ ಪ್ರದರ್ಶನವಲ್ಲ!

LEAVE A REPLY

Please enter your comment!
Please enter your name here