Home ಸುದ್ದಿ ರಾಜ್ಯ ಮೊಬೈಲ್ ಬಿಡಿ-ಪುಸ್ತಕ ಹಿಡಿ: ಪ್ರತಿ ಶಾಲೆ, ಮನೆಯಲ್ಲಿ ಜಾರಿ ಆಗಲಿ

ಮೊಬೈಲ್ ಬಿಡಿ-ಪುಸ್ತಕ ಹಿಡಿ: ಪ್ರತಿ ಶಾಲೆ, ಮನೆಯಲ್ಲಿ ಜಾರಿ ಆಗಲಿ

0

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣವನ್ನು ಅತ್ಯಧಿಕ ಆದ್ಯತೆಯಾಗಿ ಪರಿಗಣಿಸುತ್ತಿರುವ ಕರ್ನಾಟಕ ಸರ್ಕಾರ, ಪ್ರತಿ ವರ್ಷ ಸುಮಾರು ₹65,000 ಕೋಟಿ ಅನ್ನು ಶಿಕ್ಷಣ ಇಲಾಖೆಗೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಹಿನ್ನೆಲೆ, ಬೆಂಗಳೂರು ನಗರದಲ್ಲಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ನಮ್ಮ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ರೂಪಿಸುವುದು ವೈಚಾರಿಕ ಶಿಕ್ಷಣ. ಕೇವಲ ಪಾತ್ರೆ ತುಂಬಿಸುವುದು ಶಿಕ್ಷಣ ಅಲ್ಲ. ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ ಮತ್ತು ಮಹತ್ವವಾಗಿದೆ. ಇಂಥಾ ಶಿಕ್ಷಣ ನಮ್ಮ ಸರ್ಕಾರದ ಗುರಿಯಾಗಿದೆ.

ಮೊದಲೆಲ್ಲಾ ಶೂದ್ರರಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಸಂವಿಧಾನ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಆದ್ದರಿಂದ, ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೌಲ್ಯಗಳಾಗಿದ್ದು ಇವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಮನುಷ್ಯತ್ವ ಹೊಂದಿರುವ ಅತ್ಯುನ್ನತ ನಾಗರಿಕರನ್ನು ಸೃಷ್ಟಿಸಬಹುದು. ಇದನ್ನು ಶಿಕ್ಷಕರು ಅರ್ಥ ಮಾಡಿಕೊಂಡು ನಾಗರಿಕ ಸಮಾಜ ರೂಪಿಸಬೇಕು.

ಮೌಡ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ: ಜಾತಿ ವ್ಯವಸ್ಥೆ ಇರುವ ನಮ್ಮ ಸಮಾಜದಲ್ಲಿ ಬದಲಾವಣೆ ಆಗಿ ಮಾನವೀಯ ವ್ಯವಸ್ಥೆ ರೂಪುಗೊಳ್ಳಬೇಕು. ಶಿಕ್ಷಣ ಕಲಿತೂ ಜಾತಿ ಆಚರಿಸುವುದು, ಕಂದಾಚಾರ-ಮೌಡ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ. ಆದ್ದರಿಂದ ವೈಚಾರಿಕತೆ, ವೈಜ್ಞಾನಿಕತೆ, ಪರಧರ್ಮ ಸಹಿಷ್ಣುತೆ ಮೈಗೂಡಿಸಿಕೊಳ್ಳುವ ಶಿಕ್ಷಣ ಕೊಡುವ ನೈತಿಕ ಮತ್ತು ವೃತ್ತಿಪರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ.

ಸಿಕ್ಕ ಶಿಕ್ಷಣ ಎಂಥದ್ದು: ವೈದ್ಯರಾದವರು, ಪ್ರೊಫೆಸರ್ ಗಳು, ಉಪನ್ಯಾಸಕರೂ ಹಣೆ ಬರಹ ನಂಬಿಕೊಂಡಿದ್ದಾರೆ. ಇವರು ಮತ್ತು ಎಂಜಿನಿಯರಿಂಗ್ ಓದಿದವರೂ ಜಾತಿ ಮಾಡುವುದನ್ನು, ಮೌಡ್ಯ ಆಚರಿಸುವುದನ್ನು ನಾನು ನೋಡಿದ್ದೇನೆ. ಹಾಗಾದರೆ ಇವರಿಗೆ ಸಿಕ್ಕ ಶಿಕ್ಷಣ ಎಂಥದ್ದು ಎನ್ನುವುದನ್ನು ಯೋಚಿಸಬೇಕು?

ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣ ಆಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜೊತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ‌ ಕಾರಣಕ್ಕೆ ಅವಕಾಶ ಪಡೆದು ಹೆಚ್ಚೆಚ್ಚು ಅಂಕ ಪಡೆಯುತ್ತಿರುವವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ.

ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅವರು ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರೂ, ರಾಷ್ಟ್ರಪತಿಗಳೂ ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ.

ಮೊಬೈಲ್ ಬಿಡಿ-ಪುಸ್ತಕ ಹಿಡಿ: ಮಧು ಬಂಗಾರಪ್ಪ ಮತ್ತು ಎಂ.ಸಿ.ಸುಧಾಕರ್ ಇಬ್ಬರೂ ನಮ್ಮ ಸರ್ಕಾರದ ಅತ್ಯಂತ ಕ್ರಿಯಾಶೀಲ ಯುವ ಸಚಿವರು. ಇವರು ತಮ್ಮ ಜವಬ್ದಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ ಎನ್ನುವ ಭರವಸೆ ನನಗಿದೆ. ಮೊಬೈಲ್‌ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಮಾಡಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ.

ಸಾವಿತ್ರಿ ಫುಲೆ ಮತ್ತು ಫಾತಿಮಾ ಶೇಕ್ ಇಬ್ಬರೂ ದಮನಿತ ಮಹಿಳೆಯರಿಗೆ ಶಿಕ್ಷಣ ಕೊಟ್ಟ ಮೊದಲ ಶಿಕ್ಷಕಿಯರು. ಇವರಿಗೆ ಸೆಗಣಿಯನ್ನೆಲ್ಲಾ ಎಸೆದು ಅವಮಾನಿಸಲಾಗಿತ್ತು. ಈ ಎಲ್ಲಾ ಅವಮಾನ ಸಹಿಸಿಕೊಂಡೂ ಶಿಕ್ಷಣ ನೀಡಿದರು ಎಂದರು.

NO COMMENTS

LEAVE A REPLY

Please enter your comment!
Please enter your name here

Exit mobile version