ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ. ಕೊಡಲು ನಿರ್ಧರಿಸಿದೆ.
ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50 ರೂ. ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30 ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ. ಪ್ರತಿಭಟನಾ 10.25 ಇಳುವರಿ ಇರುವ ಕಬ್ಬಿಗೆ 3100 ರೂ̧. 11.25 ಇಳುವರಿ ಕಬ್ಬಿಗೆ 3200 ರೂ. ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ. ಪಾಟೀಲ್, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ ಮತುಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ನಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.
ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.
ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ ಎಂದು ಸ್ಪಷ್ಟಪಡಿಸಿದರು.
