ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಗೃಹಜ್ಯೋತಿʼ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆಗೆ ಸರ್ಕಾರ ಮತ್ತೊಂದು ತಿಂಗಳ ಕಾಲಾವಕಾಶ ನೀಡಿದೆ. ಈ ಹಿಂದೆ ನಿಗದಿಪಡಿಸಿದ್ದ ಗಡುವು ಆಗಸ್ಟ್ 31ಕ್ಕೆ ಮುಕ್ತಾಯಗೊಳ್ಳಬೇಕಿದ್ದರೂ, ಪರಿಶೀಲನಾ ಕಾರ್ಯ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗಡುವನ್ನು ವಿಸ್ತರಿಸಲಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಇನ್ನು ಶೇಕಡಾ 30 ರಷ್ಟು ಪರಿಶೀಲನಾ ಕಾರ್ಯ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 30ರ ವರೆಗೆ ಗಡುವನ್ನು ವಿಸ್ತರಿಸಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ಜುಲೈ 1ರಿಂದ ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ದುರುಪಯೋಗ ತಡೆಯಲು ಹಾಗೂ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಈ ಮರು ಪರಿಶೀಲನಾ ಕಾರ್ಯವನ್ನು ಆರಂಭಿಸಲಾಗಿತ್ತು.
ನಿಗದಿತ ಸಮಯದೊಳಗೆ ಕಾರ್ಯ ಪೂರ್ಣಗೊಳ್ಳದ ಕಾರಣ, ಇದುವರೆಗೆ ಪರಿಶೀಲನೆ ಪೂರ್ಣಗೊಳ್ಳದ ಗ್ರಾಹಕರ ದಾಖಲೆಗಳು ಮತ್ತು ವಿದ್ಯುತ್ ಸಂಪರ್ಕಗಳ ಪರಿಶೀಲನೆಯನ್ನು ಸೆಪ್ಟೆಂಬರ್ 30ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.
ಗಡುವು ವಿಸ್ತರಣೆಯಿಂದ ಇನ್ನೂ ಮರು ಪರಿಶೀಲನೆಗೆ ಒಳಪಡದಿರುವ ಗೃಹಜ್ಯೋತಿ ಫಲಾನುಭವಿಗಳಿಗೆ ತಮ್ಮ ದಾಖಲೆ ಹಾಗೂ ವಿದ್ಯುತ್ ಸಂಪರ್ಕದ ಪರಿಶೀಲನೆ ಪೂರ್ಣಗೊಳಿಸಿಕೊಳ್ಳಲು ಹೆಚ್ಚುವರಿ ಸಮಯ ದೊರೆತಂತಾಗಿದೆ.





















