Home Advertisement
Home ಸುದ್ದಿ ರಾಜ್ಯ ಶೃಂಗೇರಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಎನ್. ಜೀವರಾಜ್

ಶೃಂಗೇರಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಎನ್. ಜೀವರಾಜ್

0
79

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ತೀವ್ರ ರಾಜಕೀಯ ಹೋರಾಟದ ಬಳಿಕ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಬುಧವಾರ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನಸೌಧದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಮುನಿರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶೃಂಗೇರಿ ಶಾರದಾಂಬೆ ಹಾಗೂ ಭಗವಂತನ ಹೆಸರಿನಲ್ಲಿ ಜೀವರಾಜ್ ಪ್ರಮಾಣವಚನ ಸ್ವೀಕರಿಸಿದ್ದು, ಬಳಿಕ ಸ್ಪೀಕರ್ ಖಾದರ್ ಅವರು ಅಭಿನಂದಿಸಿ ವಿಧಾನಸಭಾ ನಡಾವಳಿಗಳ ಪುಸ್ತಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆರ್. ಅಶೋಕ್ ಅವರು ಹಾರ ಹಾಗೂ ಪೇಟೆ ಹಾಕಿ ಜೀವರಾಜ್ ಅವರನ್ನು ಸನ್ಮಾನಿಸಿದರು.

ಇದರ ಮಧ್ಯೆ ಪ್ರಮಾಣವಚನ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂವಿಧಾನದ ಪ್ರಕಾರ ಸ್ಪೀಕರ್ ಪ್ರಮಾಣವಚನ ಬೋಧಿಸದಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸುವುದಾಗಿ ಎಚ್ಚರಿಕೆ ನೀಡಿದ್ದರು. ಅಗತ್ಯವಿದ್ದರೆ ಹೋರಾಟ ನಡೆಸುವುದಾಗಿ ಅವರು ಹೇಳಿದ್ದರು.

ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆಗಳು ನಡೆದಿವೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಂಚೆ ಮತಗಳ ಮರು ಎಣಿಕೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದ ನಂತರ ನಡೆದ ಮರು ಎಣಿಕೆಯಲ್ಲಿ ಜೀವರಾಜ್ ಅವರಿಗೆ ಬಹುಮತ ಲಭಿಸಿತು. ಇದರ ಆಧಾರದ ಮೇಲೆ ಚುನಾವಣಾಧಿಕಾರಿಗಳು ಜೀವರಾಜ್ ಅವರಿಗೆ ವಿಜಯ ಪ್ರಮಾಣಪತ್ರ ನೀಡಿದರು.

ಈ ಮೂಲಕ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ತಿರುವು ಕಂಡಿದ್ದು, ಬಿಜೆಪಿ ತನ್ನ ಸ್ಥಾನವನ್ನು ಮರುಪಡೆಯಲು ಯಶಸ್ವಿಯಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗಿದೆ.