Home ಸುದ್ದಿ ರಾಜ್ಯ ದೀಪಾವಳಿಗೆ ‘ಗೃಹಲಕ್ಷ್ಮಿ’ ಉಡುಗೊರೆ: ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ಮಹಿಳೆಯರಿಗೆ ಸಿಹಿ ಸುದ್ದಿ!

ದೀಪಾವಳಿಗೆ ‘ಗೃಹಲಕ್ಷ್ಮಿ’ ಉಡುಗೊರೆ: ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ಮಹಿಳೆಯರಿಗೆ ಸಿಹಿ ಸುದ್ದಿ!

0

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ದೀಪಾವಳಿ ಹಬ್ಬಕ್ಕೂ ಮುನ್ನ ಮಹಿಳೆಯರ ಖಾತೆಗೆ 2,000ರೂ. ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದು ಹಲವು ಮಹಿಳೆಯರಿಗೆ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.

ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಸನಾಂಬೆ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ದಸರಾ ಹಬ್ಬದ ಸಂದರ್ಭದಲ್ಲಿ ಒಂದು ಕಂತಿನ ಹಣ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಇದೀಗ ಆಗಸ್ಟ್ ತಿಂಗಳ ಬಾಕಿ ಹಣ ದೀಪಾವಳಿಗೆ ಮುನ್ನವೇ ಜಮಾ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವರು ವಿವರಿಸಿದಂತೆ, ಜುಲೈ ತಿಂಗಳ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಸೇರಿದೆ. ಈಗ ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಖಾತೆಗೆ ಬರಲಿದ್ದು, ಸೆಪ್ಟೆಂಬರ್ ತಿಂಗಳ ಹಣ ಕೂಡ ಆದಷ್ಟು ಬೇಗ ಜಮಾ ಆಗಲಿದೆ. ಈ ಮೂಲಕ ಸರ್ಕಾರವು ಮಹಿಳೆಯರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಬದ್ಧವಾಗಿದೆ ಎಂದು ತೋರಿಸಿಕೊಟ್ಟಿದೆ.

‘ಗೃಹಲಕ್ಷ್ಮಿ’ ಮತ್ತು ‘ಶಕ್ತಿ’ ಯೋಜನೆಗಳು ಮಹಿಳೆಯರಲ್ಲಿ ಸ್ವಾವಲಂಬನೆ ಮತ್ತು ಆತ್ಮವಿಶ್ವಾಸವನ್ನು ತುಂಬಿವೆ. ಇದು ನಮ್ಮ ಸರ್ಕಾರದ ಸಾರ್ಥಕ ಭಾವನೆಯನ್ನು ಹೆಚ್ಚಿಸಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಹಾಸನಾಂಬೆ ದರ್ಶನದ ಕುರಿತು ಮಾತನಾಡಿದ ಸಚಿವರು, ಮೊದಲ ಬಾರಿಗೆ ತಾಯಿಯ ದರ್ಶನ ಪಡೆದಿದ್ದು, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಉತ್ತಮ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದ್ದಾರಂತೆ.

ಜಿಲ್ಲಾಡಳಿತವು ಭಕ್ತರಿಗೆ ಉತ್ತಮ ವ್ಯವಸ್ಥೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಈ ಯೋಜನೆಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿ, ಅವರ ಜೀವನದಲ್ಲಿ ಸುಧಾರಣೆ ತರುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version