ICDS ಕಾರ್ಯಕ್ರಮ ಜಾರಿಗೆ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ

0
46

ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) 50 ವರ್ಷ ಪೂರೈಸಿಕೊಂಡಿರುವ ಈ ಸುವರ್ಣ ಸಂದರ್ಭದಂದು, ಐಸಿಡಿಎಸ್ ಯೋಜನೆ ಅತ್ಯಂತ ಯಶಸ್ವಿಯಾಗಿ ಜಾರಿಯಾಗಿರುವ ರಾಜ್ಯಗಳಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರುದಲ್ಲಿ ನಡೆದ ಐಸಿಡಿಎಸ್ ಸುವರ್ಣ ಮಹೋತ್ಸವ, ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಯೋಜನೆ ಮಹಿಳೆಯರ ಮತ್ತು ಮಕ್ಕಳ ಜೀವನದಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ತಂದಿದೆಯೆಂದು ಪ್ರಶಂಸೆ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿ ಅಕ್ಟೋಬರ್ 2, 2025 ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷಗಳು ತುಂಬಿರುವುದು ಒಂದು ಬೃಹತ್ ಮೈಲುಗಲ್ಲು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್. ಎಪ್ಪತ್ತರ ದಶಕದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ, ಶಿಶು ಮತ್ತು ತಾಯಿಮರಣ ಹೆಚ್ಚಿದ ಸಂದರ್ಭದಲ್ಲಿ ಈ ಕಾರ್ಯಕ್ರಮ ಜಾರಿಯಾಗಿತ್ತು. ಇಂದಿರಾ ಗಾಂಧಿಯವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಠಿಕತೆ ನಿವಾರಿಸುವ ಉದ್ದೇಶದಿಂದ ಜಾರಿ ಮಾಡಿದರು.

ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಈ ಕೇಂದ್ರಗಳಿಂದ ಲಾಭ ಪಡೆಯುತ್ತಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದು, ಇವರು ಮಕ್ಕಳ ಆರೈಕೆಯಲ್ಲಿ ನಿರತವಾಗಿರುವ ಎರಡನೇ ತಾಯಿಯಂತಿದ್ದಾರೆ. ಇದು ಉದಾತ್ತವಾದ ಕೆಲಸ. ಮಕ್ಕಳು ದೇಶದ ಮುಂದಿನ ಭವಿಷ್ಯ. ಐಸಿಡಿಎಸ್ ಕಾರ್ಯಕ್ರಮದಿಂದ ಶಿಶು ಹಾಗೂ ತಾಯಿಮರಣ ಗಣನೀಯವಾಗಿ ಕಡಿಮೆಯಾಗಿದೆ. ವಿವಿಧೋದ್ದೇಶ ಸಹಕಾರ ಸಂಘವನ್ನು ಪ್ರಾರಂಭಿಸಲಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸಹಾಯವಾಗಲಿ ಎಂದು ಹಾರೈಸುತ್ತೇನೆ

ಹೆಣ್ಣೊಬ್ಬಳು ವಿದ್ಯಾವಂತೆಯಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1 ಕೋಟಿ 26 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2,000 ರೂ.ಗಳನ್ನು ಒದಗಿಸಲಾಗಿದೆ.

ಹೆಣ್ಣುಮಕ್ಕಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕೆಂದು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬಂದು, ಸಮಾನ ಅವಕಾಶಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿಗಳಿಗೆ ಸರ್ಕಾರ 1 ಲಕ್ಷ 4 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಿದೆ.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಕಣ್ಣು ತೆರೆಯಬೇಕು. ಬಿಜೆಪಿಯವರು, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ವಿರೋಧಿಸಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿ ಯೋಜನೆಗೂ ವೆಚ್ಚ ಮಾಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ಮಾತ್ರ ನಮಗೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ.

ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95,000 ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಲಿಂಗ ತಾರಾತಮ್ಯ ಹೋಗಲಾಡಿಸಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ನಮ್ಮ ಸರ್ಕಾರ ಎಲ್ಲರನ್ನು ಒಳಗೊಂಡ, ಸಾಮಾಜಿಕ, ಆರ್ಥಿಕ ಶಕ್ತಿ ನೀಡುತ್ತಿದೆ. ಜಾತಿ, ಲಿಂಗ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿಲ್ಲ.

ಸಮಗ್ರ ಅಭಿವೃದ್ಧಿ ನಮ್ಮ ಗುರಿ. ಬಡವ – ಬಲ್ಲಿದ ಎಂಬ ತಾರತಮ್ಯ ಹೋಗಲಾಡಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ.

ಐಸಿಡಿಎಸ್ ಕೇಂದ್ರ ಸರ್ಕಾರದ ಕಾರ್ಯಕ್ರಮವಾದರೂ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಕೊಡುತ್ತಿದೆ. ಕೇಂದ್ರದಿಂದ 2,700 ರೂ. ಬಂದರೆ, ರಾಜ್ಯ ಸರ್ಕಾರ ರೂ. 8,500 ಒದಗಿಸುತ್ತಿದೆ. ಇಡೀ ದೇಶದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಹೆಚ್ಚಿನ ಗೌರವಧನವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಐಸಿಡಿಎಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿರುವ ರಾಜ್ಯಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ಉದ್ಯೋಗಕ್ಕೆ ಹೋಗುವ ಮಹಿಳೆಯರ ಪಾಲು ಶೇ 23% ಇದ್ದರೆ, ಗ್ರಾಮೀಣ ಭಾಗದಲ್ಲಿ 21% ಹೆಚ್ಚಾಗಿದೆ.

ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಕ್ಕಳು, ತಾಯಂದಿರ ಅಪೌಷ್ಟಿಕತೆ ತೊಲಗಿಸಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಒಟ್ಟು 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ತರಗತಿಗಳನ್ನು ಇನ್ನೂ ಹೆಚ್ಚಿನ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು.

ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಶುಭಾಶಯಗಳು. ಹಿರಿಯ ನಾಗರಿಕರು ನೆಮ್ಮದಿಯ ಹಾಗೂ ಗೌರವಯುತ ಜೀವನ ನಡೆಸುವಂತಾಗಬೇಕು, ಇದು ನಮ್ಮ ಸರ್ಕಾರದ ಆಶಯವೂ ಆಗಿದೆ. ಇದೇ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸುವ ‘ಅಕ್ಕಾ’ ಪಡೆಯನ್ನು ಇಂದು ಸಂತೋಷದಿಂದ ಲೋಕಾರ್ಪಣೆಗೊಳಿಸಲಾಗಿದೆ ಎಂದರು.

Previous articleಸಚಿವ ಪ್ರೀಯಾಂಕ ಖರ್ಗೆ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್‌ಗೆ ‘ಸಮಯ ಪ್ರಜ್ಞೆ’ ಇದೆ, ಕರ್ನಾಟಕದ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸುತ್ತೆ
Next articleರಾಜ್ಯದಲ್ಲಿ ಚಾಕು ಚೂರಿ ಸಂಸ್ಕೃತಿ ಮತ್ತೆ ಮರುಕಳಿಸಲಿದೆ; ಎಂ.ಪಿ. ರೇಣುಕಾಚಾರ್ಯ ಭವಿಷ್ಯ

LEAVE A REPLY

Please enter your comment!
Please enter your name here