ಸಿಂಧನೂರು: ಡಿಸೆಂಬರ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಕಳೆದುಕೊಳ್ಳಲಿದ್ದು, ಹೊಸ ವರ್ಷಕ್ಕೆ ಕಾಂಗ್ರೆಸ್ನಲ್ಲಿ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೊಸ ಬಾಂಬ್ ಸಿಡಿಸಿದರು.
ಸಿಂಧನೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಬಿಸಿಲು ಕುದುರೆ ಏರಿದ್ದಾರೆ. ಬಿಸಿಲು ಕುದುರೆ ಎಲ್ಲಿಯವರೆಗೆ ಹೋಗುತ್ತದೆ ಎಂಬುದು ನಮಗೆ ಗೊತ್ತಿದೆ. ಹೊಸ ವರ್ಷಕ್ಕೆ ಕಾಂಗ್ರೆಸ್ನಲ್ಲಿ ಹೊಸ ಮುಖ್ಯಮಂತ್ರಿ ಬರಲಿದ್ದಾರೆ. ಈ ರೀತಿಯ ಸುದ್ದಿಗಳು ದೆಹಲಿಯಿಂದ ಬರುತ್ತಿವೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಸೇರಿದಂತೆ ಸಾಮಾನ್ಯ ಜನರ ಯೋಜನೆಗಳನ್ನೇ ಕಸಿದುಕೊಂಡ ಸರ್ಕಾರವಾಗಿದೆ ಎಂದು ಆರೋಪಿಸಿದ ಸುನೀಲ್ ಕುಮಾರ್, ಗ್ರಾಮೀಣ ಭಾಗದ ಜನರಿಗೆ ಸರ್ಕಾರದಿಂದ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಹೇಳುತ್ತಿರುವ ಸರ್ಕಾರ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳನ್ನು ಬರ ಘೋಷಣೆಯಿಂದ ಹೊರಗಿಟ್ಟಿದೆ ಎಂದು ದೂರಿದರು.
ಇದು ಉತ್ತರ ಕರ್ನಾಟಕ ವಿರೋಧಿ ಸರ್ಕಾರವಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಯುವಕರು ಹಾಗೂ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ರಾಜಕೀಯದಲ್ಲೇ ಮುಳುಗಿದೆ ಎಂದು ಟೀಕಿಸಿದರು.



















