ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಏಳು ಜನ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಬೆಂಗಳೂರಿನ ಆರ್ಆರ್ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದು, ಎ2 ನಟ ದರ್ಶನ ಅವರನ್ನು ಪತ್ನಿ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ನಲ್ಲಿದ್ದ ಅವರ ಪತ್ನಿ ಮನೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಇನ್ನು ನಟ ದರ್ಶನ್ ಆಪ್ತ ಎ14 ಪ್ರದೂಷ್, ಎ5 ನಾಗರಾಜ್ ಮತ್ತು ಎ6 ಲಕ್ಷ್ಮಣ ಅವರನ್ನು ಸಹ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಠಾಣೆಗೆ ಕರೆದೊಯ್ದಿದ್ದಾರೆ. ದರ್ಶನ್, ಪವಿತ್ರಾ ಸೇರಿ ಐವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಇಬ್ಬರು ಆರೋಪಿಗಳಾದ ಎ6 ಜಗದೀಶ್ ಮತ್ತು ಎ7 ಅನುಕುಮಾರ್ ಅವರನ್ನು ಚಿತ್ರದುರ್ಗದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಎಲ್ಲ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಸುಪ್ರೀಂ ಕೋರ್ಟ್ ಹೇಳಿದ್ದೇನು?: ಇದೊಂದು ಮಹತ್ವದ ತೀರ್ಪು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿಯೇ ಹೇಳಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ6 ಜಗದೀಶ್, ಎ7 ಅನು ಕುಮಾರ್, ಎ14 ಪ್ರದೋಶ್, ಎ11 ನಾಗರಾಜು ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಗೊಂಡಿದೆ.
ಸರ್ಕಾರ ತನ್ನ ಮೇಲ್ಮನವಿಯಲ್ಲಿ ದರ್ಶನ್ಗೆ ಈ ಹಿಂದೆ ಕೂಡ ಅಪರಾಧ ಹಿನ್ನೆಲೆ ಇದೆ. ಬೆನ್ನು ನೋವು ಎಂದು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದಿದ್ದಾರೆ. ಆದರೆ ಮರು ದಿನ ಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ ಎಂದು ಸರ್ಕಾರ ವಾದಿಸಿತ್ತು.
ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ. ದಾಖಲೆಗಳಿಗೆ ವಿರುದ್ಧವಾಗಿ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ತೀರ್ಪಿನಲ್ಲಿ ಹೇಳಿದೆ.
ಆದರೆ, ಮೃತಪಟ್ಟ ವ್ಯಕ್ತಿಯ ಮೈ ಮೇಲಿನ ಗಾಯಗಳು ಇದನ್ನು ಸುಳ್ಳು ಎಂದು ಹೇಳುತ್ತಿವೆ. ಸಾಕ್ಷಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂದು ಅನುಮಾನಿಸಲಾಗಿದೆ ಎಂದು ಹೇಳಿರುವ ಕೋರ್ಟ್, ಸಾಕ್ಷಿಗಳ ವಿಚಾರಣೆಯನ್ನು ನಡೆಸಿ, ಪ್ರಕರಣದ ವಿಚಾರಣೆ ನಡೆಸಿ ಎಂದು ನಿರ್ದೇಶನ ನೀಡಿದೆ.