ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ. ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ ಎಂದಿದ್ದಾರೆ.
ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದ್ದಾರೆ.
ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ ‘ಆ್ಯಪ್’ ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ, ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗದ ಅಧ್ಯಕ್ಷರು ಮನವಿ ಮಾಡಿದ್ದಾರೆ.