ಬೆಂಗಳೂರು: ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಕುರಿತ ವಿವಾದಕ್ಕೆ ಸಂಬಂಧಿಸಿ, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ನ್ಯಾಯಾಲಯವು ₹1 ಲಕ್ಷ ದಂಡ ವಿಧಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಪಿಐಎಲ್ಗೆ ನ್ಯಾಯಾಲಯದ ತೀವ್ರ ಆಕ್ಷೇಪ: ಹೆಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿದ್ದ ಪಿಐಎಲ್ನಲ್ಲಿ, ಸರ್ಕಾರದ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗಲಿದೆ ಎಂದು ವಾದಿಸಲಾಗಿತ್ತು. ಆದರೆ, ಸರ್ಕಾರದ ಅಧಿಕೃತ ಆದೇಶದ ಪ್ರತಿಯನ್ನು ಸಲ್ಲಿಸದೆ, ಕೇವಲ ಪತ್ರಿಕಾ ವರದಿಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿರುವುದನ್ನು ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿದೆ.
ಈ ಹಿನ್ನೆಲೆಯಲ್ಲಿ, ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದೆ ಅಲ್ಲದೆ ಇಬ್ಬರು ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ.
SSLC ಗ್ರೇಡಿಂಗ್ ನಿರ್ಧಾರ ಏನು?: ರಾಜ್ಯ ಸರ್ಕಾರವು SSLC ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಈ ಕ್ರಮವು ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು.
ಪರ-ವಿರೋಧ ಚರ್ಚೆ ತೀವ್ರ: ಈ ನಿರ್ಧಾರಕ್ಕೆ ಕನ್ನಡಪರ ಸಂಘಟನೆಗಳಿಂದ ಸ್ವಾಗತಿಸಿದ್ದರೆ ಕೆಲ ರಾಜಕೀಯ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಕ್ಷೇತ್ರದಲ್ಲಿಯೂ ಈ ವಿಷಯ ಚರ್ಚೆಗೆ ಕಾರಣವಾಗಿತ್ತು.























