ಬೆಂಗಳೂರು: ನನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಬೇಡ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಚಿವರು, ಸಮಯದ ಅಭಾವ ಇರುವುದರಿಂದ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಬೇಡಿ ಎಂದು ಕೋರಿದ್ದಾರೆ. ಅಲ್ಲದೇ ವಿಜಯನಗರ ಜಿಲ್ಲೆ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಲು ಕೋರಿದ್ದಾರೆ.
ಪತ್ರದಲ್ಲೇನಿದೆ?: “ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ.”
“ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರಿದೆ.”
ಮುಂದುವರಿದಂತೆ ದಿನಾಂಕ: 15.08.2026 ರಂದು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಲು ತಮ್ಮಲ್ಲಿ ಕೋರಿದೆ.
“ಸದರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ನೀಡಲಾಗಿದ್ದು ಈಗಾಗಲೇ ಈ ಸಂಬಂಧ ವರದಿಯನ್ನು ಸಲ್ಲಿಸಲಾಗಿರುತ್ತದೆ.” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.




















