ಡೆಹ್ರಾಡೂನ್: ಉತ್ತರಾಖಂಡದ ಹರಿದ್ವಾರದಲ್ಲಿರುವ ದೇವಸ್ಥಾನದ ಬಳಿ ಕಾಲ್ತುಳಿತ ಉಂಟಾಗಿ 6 ಜನ ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಮಾನಸ ದೇವಿ ದೇವಸ್ಥಾನಕ್ಕೆ ದರ್ಶನಕ್ಕೆಂದು ಬಂದಿದ್ದ ಭಕ್ತರು, ದೇವಸ್ಥಾನದ ಮೆಟ್ಟಿಲು ಮೇಲೆ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ದೇವಿ ದರ್ಶನಕ್ಕೆಂದು ಸರದಿಯಲ್ಲಿ ನಿಂತಿದ್ದ ಭಕ್ತರಿಗೆ 9.30ರ ಸುಮಾರಿಗೆ ಮೆಟ್ಟಿಲು ಮೇಲೆ ವಿದ್ಯುತ್ ಪ್ರವಹಿಸುತ್ತಿದೆ ಎಂಬ ವಂದತಿ ಹರಡಿದೆ. ಪರಿಣಾಮ ಭಕ್ತರು ಭಯಭೀತರಾಗಿ ಓಡಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
“ವಿದ್ಯುತ್ ಪ್ರವಹಿಸುತ್ತಿದೆ ಎಂಬ ಬಗ್ಗೆ ಹರಡಿದ ವದಂತಿಯೇ ನೂಕು ನುಗ್ಗಲಿಗೆ ಕಾರಣವಾಗಿ ಇದರಿಂದಾಗಿ ಕಾಲ್ತುಳಿತವಾಗಿದೆ” ಎಂದು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ಸಿಂಗ್ ದೋಬಾಲ್ ಈ ಕುರಿತು ಮಾಹಿತಿ ನೀಡಿದ್ದು, ದೇವಾಲಯದ ಮೆಟ್ಟಿಲುಗಳ ಬಳಿ ವಿದ್ಯುತ್ ಪ್ರವಹಿಸುತ್ತಿದೆ ಎಂಬ ವದಂತಿಯಿದಾಗಿ ಕಾಲ್ತುಳಿತ ಸಂಭವಿಸಿದೆ.
ಪೊಲೀಸರು, ಎಸ್ಡಿಆರ್ಎಫ್ ಮತ್ತು ಇತರ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಗೊಂಡಿರುವ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ಹರಿದ್ವಾರದ ಮಾನಸ ದೇವಿ ದೇವಸ್ಥಾನಕ್ಕೆ ಬಳಿ ನಡೆದ ಕಾಲ್ತುಳಿತದ ದುರಂತ ಸುದ್ದಿಯಿಂದ ತೀವ್ರ ದುಃಖಿತನಾಗಿದ್ದೇನೆ. ಎಸ್ಡಿಆರ್ಎಫ್, ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಎಲ್ಲಾ ಭಕ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಆಡಳಿತ ವ್ಯವಸ್ಥೆಯ ವೈಫಲ್ಯವೇ ಕಾರಣ: ಇನ್ನು ಈ ಕುರಿತಂತೆ ಎಎಪಿ ವರಿಷ್ಠ ಅರವಿಂದ ಕೇಜ್ರವಾಲ್, ಉತ್ತರಾಖಂಡದ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಆಡಳಿತ ವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಪವಿತ್ರ ನಗರ ಹರಿದ್ವಾರದಲ್ಲಿರುವ ಮಾನಸ ದೇವಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದ ಹೃದಯವಿದ್ರಾವಕ ಘಟನೆಯಿಂದ ಹೃದಯವು ದುಃಖಿತವಾಗಿದೆ. ದೇವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಭಕ್ತರಿಗೆ ಶಕ್ತಿ ನೀಡಲಿ ಮತ್ತು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ. ಧಾರ್ಮಿಕ ಸ್ಥಳಗಳಲ್ಲಿ ಇಂತಹ ಭಯಾನಕ ಘಟನೆಗಳು ವ್ಯವಸ್ಥೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತವೆ ಎಂದು ಪೋಸ್ಟ್ ಹಾಕಿದ್ದಾರೆ.