Home Advertisement
Home ತಾಜಾ ಸುದ್ದಿ ಬಡತನ ರೇಖೆಯಿಂದ ಮೇಲೆ ಬಂದ ೧ ಕೋಟಿ ಜನ

ಬಡತನ ರೇಖೆಯಿಂದ ಮೇಲೆ ಬಂದ ೧ ಕೋಟಿ ಜನ

0
125

ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಇದು ಸಾಧ್ಯವಾಗಿದೆ: ಈಶ್ವರ್ ಖಂಡ್ರೆ

ದಾವಣಗೆರೆ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದರಿಂದ ರಾಜ್ಯದಲ್ಲಿ ೧ ಕೋಟಿ ಜನರು ಬಡತನ ರೇಖಯಿಂದ ಮೇಲೆ ಬಂದಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಮೇ.೨೦ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದ ಅಂಗವಾಗಿ ದಾವಣಗೆರೆ ದಕ್ಷಿಣ ಮತ್ತು ದಾವಣಗೆರೆ ಉತ್ತರ ಕ್ಷೇತ್ರದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಇಡೀ ಜಗತ್ತಿಗೆ, ರಾಜ್ಯಕ್ಕೆ, ರಾಷ್ಟ್ರಕ್ಕೆ ಮಾದರಿ ಆಗಿರುವುದು ನಮ್ಮ ಪಂಚ ಗ್ಯಾರಂಟಿ ಯೋಜನೆಗಳು. ನಾವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ಸರ್ಕಾರ ದಿವಾಳಿಯಾಗುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಷ್ಟೇ ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರು ಕೂಡ ಟೀಕಿಸಿದ್ದರು. ನಾವು ಗ್ಯಾರಂಟಿ ಘೋಷಣೆ ಮಾಡಿದಂತೆ ಬಜೆಟ್‌ನಲ್ಲಿ ೫೩ ಸಾವಿರ ಕೋಟಿ ಮೀಸಲಿಟ್ಟು ಅದನ್ನು ಯಥಾವತ್ತಾಗಿ ಅನುಷ್ಠಾನ ಮಾಡುತ್ತಿದ್ದೇವೆ ಎಂದರು.
ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ, ಯುವನಿಧಿ ಯೋಜನೆಗಳನ್ನು ಘೋಷಿಸಿ ನುಡಿದಂತೆ ನಡೆದಿದ್ದೇವೆ. ಸರ್ಕಾರ ಪಂಚ ಗ್ಯಾರಂಟಿ ಅನುಷ್ಠಾನದಿಂದ ಬಡವರು ಸ್ವಾವಲಂಬಿ ಜೀವನ ನಡೆಸುವ ಆರ್ಥಿಕವಾಗಿ ಸಬಲರಾಗಿದ್ದಾರೆ. ಇದರ ಪರಿಣಾಮ ರಾಜ್ಯದಲ್ಲಿ ೧ ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ ಎಂದರು.