ಬೆಳಗಾವಿ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇಂದು ಜೆಡಿಎಸ್ ನ ಪಂಚರತ್ನ ಯಾತ್ರೆಯ ಮಧ್ಯೆ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರಿಂದ ಹಾಸನ ಮತ್ತು ಹೊಳೆನರಸೀಪುರ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಪಟ್ಟಂತೆ ಪತ್ರಕರ್ತರಿಂದ ಕುಮಾರಸ್ವಾಮಿಯವರಿಗೆ ಪ್ರಶ್ನೆ ಕೇಳಿಬಂತು.
ಅದಕ್ಕೆ ಉತ್ತರಿಸಿದ ಹೆಚ್ ಡಿಕೆ, ಅದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ, ಚುನಾವಣೆಯಲ್ಲಿ ಗೆಲ್ಲಲು ತೀರ್ಮಾನ ಮಾಡುತ್ತೇವೆ, ಅದರಲ್ಲಿ ಯಾವುದೇ ಗೊಂದಲ ಇರುವುದಿಲ್ಲ. ಅದನ್ನು ಇವತ್ತು ಕೂಡ ಸ್ಪಷ್ಟವಾಗಿ ಹೇಳುತ್ತೇನೆ. ಅದರಲ್ಲಿ ಯಾವ ಗೊಂದಲ ಬೇಕಾಗಿಲ್ಲ, ನಾವು ನಾಯಕರು ಕುಳಿತು ಹಾಸನ ಮತ್ತು ಹೊಳೆನರಸೀಪುರ ಕ್ಷೇತ್ರದ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.